ನವದೆಹಲಿ: ಕರ್ನಾಟಕದ ಮೇಕೆದಾಟು ಯೋಜನೆಗೆ ತಮಿಳುನಾಡು ಸಮ್ಮತಿ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ರಾಜ್ಯಸಭೆಯಲ್ಲಿ ತಮಿಳುನಾಡಿನ ಸಂಸದ ಅನ್ಬುಮಣಿ ರಾಮದಾಸ್ ಅವರು ಕೇಳಿದ ಪ್ರಶ್ನೆಗೆ ಜಲಶಕ್ತಿ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಅವರು ಲಿಖಿತ ಉತ್ತರ ನೀಡಿದ್ದಾರೆ.
ಕಾವೇರಿ ನದಿ ನೀರು (Cauvery River) ವಿವಾದಕ್ಕೆ ಸಂಬಂಧಿಸಿದಂತೆ 2018ರಲ್ಲಿ ನೀಡಲಾದ ಸುಪ್ರೀಂ ಕೋರ್ಟ್ (Suprme Court) ತೀರ್ಪಿನಲ್ಲಿ, ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ನಿರ್ಮಾಣ ಕಾರ್ಯ ಕೈಗೊಳ್ಳಲು ಕರ್ನಾಟಕವು ತಮಿಳುನಾಡು, ಕೇರಳ ಅಥವಾ ಪುದುಚೇರಿಯಿಂದ ಅನುಮತಿ/ಸಮ್ಮತಿ ಪಡೆಯಬೇಕು ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ.
ಅನ್ಬುಮಣಿ ರಾಮದಾಸ್ ಕೇಳಿದ್ದೇನು?
ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ರೀತಿಯ ರಚನೆಯನ್ನು ನಿರ್ಮಿಸಲು ತಮಿಳುನಾಡು, ಕೇರಳ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳ ಒಪ್ಪಿಗೆಯನ್ನು ಪಡೆಯಬೇಕು ಎಂಬ ಕಾವೇರಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 2018 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಕೇಂದ್ರ ಸರ್ಕಾರಕ್ಕೆ ತಿಳಿದಿದೆಯೇ? ಪ್ರಸ್ತಾವಿತ ಮೇಕೆದಾಟು ಯೋಜನೆಗೆ ಕರ್ನಾಟಕ (Karnataka) ಕೆಳಗಿನ ನದಿ ತೀರ್ಪಿನ ರಾಜ್ಯಗಳ ಒಪ್ಪಿಗೆಯನ್ನು ಪಡೆದಿದೆಯೇ? ಒಪ್ಪಿಗೆ ಪಡೆದಿದ್ದಲ್ಲಿ ಅದರ ವಿವರಗಳು; ಮತ್ತು ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾವನೆಯ ಪ್ರಸ್ತುತ ಸ್ಥಿತಿ ಏನು ಎಂದು ಪ್ರಶ್ನಿಸಿದ್ದರು.
ಕೇಂದ್ರದ ಉತ್ತರ ಏನು?
ಕಾವೇರಿ ನದಿಗೆ ಅಡ್ಡಲಾಗಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಮೇಲ್ಭಾಗದ ರಾಜ್ಯವಾದ ಕರ್ನಾಟಕವು ಕೆಳಭಾಗದ ರಾಜ್ಯಗಳ ಅನುಮತಿ ಪಡೆಯುವುದು ಕಡ್ಡಾಯ ಎಂದು 2018ರ ಫೆಬ್ರವರಿ 16ರ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಉಲ್ಲೇಖವಾಗಿಲ್ಲ.
2007ರ ಕಾವೇರಿ ನೀರು ವಿವಾದ ನ್ಯಾಯಾಧಿಕರಣದ (CWDT) ತೀರ್ಪಿನ 18ನೇ ವಿಧಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರ ಪ್ರಕಾರ, ನ್ಯಾಯಾಧಿಕರಣದ ಆದೇಶಕ್ಕೆ ಧಕ್ಕೆಯಾಗದಂತೆ ತಮ್ಮ ಗಡಿಭಾಗದ ವ್ಯಾಪ್ತಿಯಲ್ಲಿ ನೀರಿನ ಬಳಕೆ ಅಥವಾ ಸೌಲಭ್ಯವನ್ನು ನಿಯಂತ್ರಿಸುವ ಹಕ್ಕು ಆಯಾ ರಾಜ್ಯಗಳಿಗೆ ಇದೆ.
ಕರ್ನಾಟಕ ಸರ್ಕಾರವು 2019ರಲ್ಲಿ ಸಲ್ಲಿಸಿದ್ದ ‘ಮೇಕೆದಾಟು ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆ’ಯ ಸಮಗ್ರ ಯೋಜನಾ ವರದಿಯನ್ನು (DPR) ಹಿಂತಿರುಗಿಸಲಾಗಿದೆ. ನ್ಯಾಯಾಧಿಕರಣದ ಆದೇಶ ಹಾಗೂ ಕೇಂದ್ರ ಜಲ ಆಯೋಗದ (CWC) ಪ್ರಸ್ತುತ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಪರಿಷ್ಕೃತ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ.




