ಬೆಳಗಾವಿ; ರಾಜ್ಯದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 2400 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಳೆದ ಮೂರು ವರ್ಷಗಳಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ 2105 ಕೋಟಿ ರೂ.ಮಂಜೂರು ಮಾಡಲಾಗಿದೆ.2047 ಕೋಟಿ ರೂ.ವೆಚ್ಚ ಮಾಡಲಾಗಿದೆ.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 238 ಕೋಟಿ ರೂ. ಮಂಜೂರು ಮಾಡಲಾಗಿತ್ತು 300 ಕೋಟಿ ರೂ.ಖರ್ಚು ಮಾಡಲಾಗಿದೆ.ಬಿಡುಗಡೆಯಾಗಿರುವದಕ್ಕಿಂತ ಹೆಚ್ಚು ಅನುದಾನ ವೆಚ್ಚವಾಗಿದೆ.ಹಿಂದಿನ ವರ್ಷಗಳಲ್ಲಿ ಉಳಿಕೆಯಾಗಿರುವ ಅನುದಾನದಲ್ಲಿ ಇದನ್ನು ಸರಿದೂಗಿಸಲಾಗಿದೆ ಎಂದರು.
ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ವಕ್ಫ್ ಆಸ್ತಿಗಳ ಸಂರಕ್ಷಣೆ,ದುರಸ್ತಿ ಮತ್ತು ಜೀರ್ಣೋದ್ಧಾರ ,ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಕಳೆದ ಮೂರು ವರ್ಷಗಳಲ್ಲಿ 88.75 ಕೋಟಿ ರೂ.ಅನುದಾನ ಮಂಜೂರು ಮಾಡಲಾಗಿದೆ.50.91 ಕೋಟಿ ರೂ.ಅನುದಾನ ವೆಚ್ಚವಾಗಿದೆ.
ರಾಜ್ಯ ವಕ್ಫ್ ಮಹಿಳಾ ಅಭಿವೃದ್ಧಿ ಪ್ರತಿಷ್ಠಾನದಡಿ ಅಲ್ಪಸಂಖ್ಯಾತ ಮುಸ್ಲಿಂ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಆರೋಗ್ಯ ಪರಿಹಾರ ನಿಧಿ ಯೋಜನೆಗಳಿಗೆ 17.38 ಕೋಟಿ ರೂ.ಮಂಜೂರು ಮಾಡಲಾಗಿದೆ.14.74 ಕೋಟಿ ರೂ.ವೆಚ್ಚ ಮಾಡಲಾಗಿದೆ. ಚರ್ಚ್ ಮತ್ತು ಇತರೆ ಅಲ್ಪಸಂಖ್ಯಾತ ಸಮುದಾಯ ಭವನಗಳಿಗೂ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಯವರು ಸದನದಲ್ಲಿ ವಿವರಿಸಿದರು.