ಯಾದಗಿರಿ: ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ.
ಮೃತ ಯುವಕನನ್ನ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ನಿವಾಸಿ ಬಾಲಪ್ಪ (18) ಎಂದು ಗುರುತಿಸಲಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಪದವಿ ಓದುತ್ತಿದ್ದ ಎಂದು ತಿಳಿದುಬಂದಿದೆ.
ಮೃತ ಯುವಕ ಅತಿಯಾಗಿ ಕೂಲ್ ಡ್ರಿಂಕ್ಸ್ ಕುಡಿಯುತ್ತಿದ್ದ. ಇದರ ಪರಿಣಾಮ ಕಿಡ್ನಿ ಫೇಲ್ ಆಗಿದ್ದವು. ಇತ್ತೀಚಿಗೆ ಅನಾರೋಗ್ಯದಿಂದಾಗಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಇಂದು (ಜೂ.12) ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಆಸ್ಪತ್ರೆ ಎದುರು ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದ್ದು, ಅಪಾಯಕಾರಿ ತಂಪು ಪಾನೀಯ ನಿಷೇಧ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ನಾರಾಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



