ಬೆಳಗಾವಿ/ ಧಾರವಾಡ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 18 ಮತ್ತು 19 ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಇತ್ತೀಚೆಗಷ್ಟೇ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ ಅಮಿತ್ ಶಾ ಅವರ ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸೆ.18 ರಾತ್ರಿ 10 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿರುವ ಅಮಿತ್ ಶಾ, ನಗರದ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೆಪ್ಟೆಂಬರ್ 19 ಬೆಳಗ್ಗೆ ಹುಬ್ಬಳ್ಳಿಯ ಹೊರವಲಯದ ಗಬ್ಬೂರು ಬೈಪಾಸ್ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೆ.ಎಲ್.ಇ ಸಂಸ್ಥೆಯ 1,500 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ಹಾಗೂ ನೂತನ ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಸೆ. 19 ಸಂಜೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿತಾಲೂಕಿನ ಯಕ್ಸಂಬಾ ಗ್ರಾಮಕ್ಕೆ ಭೇಟಿ ನೀಡಲಿರುವ ಅವರು ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಒಡೆತನದ ‘ಬೀರೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ’ಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ
