ಬೆಳಗಾವಿ: ಬಹುನಿರೀಕ್ಷಿತ ಬೆಳಗಾವಿ-ಕಿತ್ತೂರು-ಧಾರವಾಡ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರದ ನಿರ್ಲಕ್ಷೃ, ಭೂ ಸ್ವಾಧೀನ ಪರಿಹಾರ ಬಿಡುಗಡೆ ಮಾಡದಿರುವುದರಿಂದ ಯೋಜನೆ ನನೆಗುದಿಗೆ ಬಿದ್ದಿದೆ ಎಂದು ಸಂಸದ ಜಗದೀಶ ಶೆಟ್ಟರ್ ದೂರಿದರು.
ನಗರದ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಯೋಜನೆಗೆ ಅಗತ್ಯವಿರುವ 1,200 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈಗಾಗಲೇ ರೈತರು ಭೂಮಿ ಬಿಟ್ಟುಕೊಟ್ಟಿದ್ದಾರೆ. ಆದರೆ, ರಾಜ್ಯ ಸರ್ಕಾರವು 400 ಕೋಟಿ ರೂ. ಪರಿಹಾರ ಪೈಕಿ ಇಲ್ಲಿಯವರೆಗೆ 50 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಇದರಿಂದಾಗಿ ರೈಲ್ವೆ ಯೋಜನೆ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ಯೋಜನೆ ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ದೆಹಲಿಯಲ್ಲಿ ಮುಖ್ಯಮಂತ್ರಿಡಿ.ಕೆ.ಶಿವಕುಮಾರ ಅವರೊಂದಿಗೆ ನಡೆದ ಸಂಸದರ ಸಭೆಯಲ್ಲಿ ರೈಲ್ವೆ, ಹೆದ್ದಾರಿ ಯೋಜನೆಗಳಿಗೆ ಭೂ ಸ್ವಾಧೀನ, ಪರಿಹಾರ ಕುರಿತು ಗಮನಕ್ಕೆ ತರಲಾಗಿದೆ. ಅಲ್ಲದೆ, ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಭೆ ನಡೆಸಲಾಗುತ್ತಿದೆ. ಆದರೆ, ರಾಜ್ಯ ಸರ್ಕಾರವು ಯೋಜನೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿಲ್ಲ.
ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ 50 ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದೆ. ಆದರೆ, ಅಭಿವೃದ್ಧಿ ಯೋಜನೆಗಳಿಗೆ ನೀಡುತ್ತಿಲ್ಲ. ಕೇಂದ್ರ ಸರ್ಕಾರದ ಸಹಯೋಗದಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಯಾವುದೇ ಯೋಜನೆ ಭೂ ಸ್ವಾಧೀನ ಮಾಡಿಕೊಡುತ್ತಿಲ್ಲ. ಹೀಗಾಗಿ ತುಮಕೂರು-ದಾವಣಗೆರೆ ನೇರ ರೈಲ್ವೆ ಯೋಜನೆ ಕೂಡ ನನೆಗುದಿಗೆ ಬಿದ್ದಿದೆ ಎಂದು ವಾಗ್ದಾಳಿ ನಡೆಸಿದರು.
ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಪ್ರದೇಶ ಹಸ್ತಾಂತರ ವಿಚಾರದಲ್ಲೂ ಕೇಂದ್ರದೊಂದಿಗೆ ಚರ್ಚೆ ನಡೆಸಲಾಗಿದೆ. ಪ್ರಸ್ತುತ 112 ಎಕರೆ ಪ್ರದೇಶ ಮಾತ್ರ ಹಸ್ತಾಂತರಿಸುವುದಾಗಿ ದಂಡು ಮಂಡಳಿ ಅಧಿಕಾರಿಗಳು ಹೇಳುತ್ತಿದ್ದಾರೆ.ಆದರೆ 600ರಿಂದ 700 ಎಕರೆ ಪ್ರದೇಶವನ್ನು ಹಸ್ತಾಂತರಿಸಬೇಕು ಎಂಬ ಬೇಡಿಕೆಯನ್ನು ರಕ್ಷಣಾ ಇಲಾಖೆಯ ಮುಂದೆ ಇಡಲಾಗಿದೆ.ಈ ಕುರಿತು ರಕ್ಷಣಾ ಇಲಾಖೆಯ ಸಭೆಯಲ್ಲಿ ಚರ್ಚಿಸಲಾಗಿದ್ದು, ಪತ್ರ ಬರೆದು ಹೆಚ್ಚಿನ ಪ್ರದೇಶ ಹಸ್ತಾಂತರಕ್ಕೆ ಒತ್ತಡ ಹೇರಲಾಗಿದೆ ಎಂದರು.




