ಬೆಳಗಾವಿ :ಬೆಳಗಾವಿ ಬರ ಜಿಲ್ಲೆಯೆಂದು ಘೋಷಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗುರುವಾರ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಮೂಲಕ ಸರ್ಕಾರಕ್ಕೆ ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ನಿಯೋಗದ ಸದಸ್ಯರು ಮನವಿ ಸಲ್ಲಿಸಿದರು.
ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದಿರುವ ಹಿನ್ನೆಲೆ ಬಿತ್ತನೆ ಮಾಡಿದ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಕೆರೆ, ಕಟ್ಟೆಗಳು ನೀರಿಲ್ಲ ಬತ್ತಿವೆ. ಜಲಾಶಯಗಳು ನಿರೀಕ್ಷಿತ ಮಟ್ಟದಲ್ಲಿ ಭರ್ತಿಯಾಗದಿರುವ ಕಾರಣ ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ಜತೆಗೆ ಕೃಷಿ ಬೆಳೆಗಳಿಗೆ ಹರಿಸಲು ನೀರಿನ ಅಭಾವ ಸೃಷ್ಟಿಯಾಗಿದೆ. ಹೀಗಾಗಿ ಬೆಳಗಾವಿ ಬರ ಜಿಲ್ಲೆಯೆಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಬಾರಿ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಹಾನಿಯಾಗಿರುವ ಕೃಷಿ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಕೃಷಿ ಇಲಾಖೆಯು ಬೆಳೆಹಾನಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಸಂಕಷ್ಟದಲ್ಲಿರುವ ರೈತರ ಬೆಳೆಸಾಲ ಮನ್ನಾ, ಹೊಸದಾಗಿ ಬೆಳೆಸಾಲ ಕಲ್ಪಸುವ ಕುರಿತು ಸರ್ಕಾರಿ ಪ್ರಸ್ತಾವನೆ ಸಲ್ಲಿಸಬೇಕು. ಕೃಷಿ ಕ್ಷೇತ್ರಕ್ಕೆ ವಿಶೇಷ ಅನುದಾನ ಬಿಡುಗಡೆ ಆದ್ಯತೆ ನೀಡಬೇಕು ಎಂದು ವಿನಂತಿಸಿದರು.
ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡ್ರ,ಅರವಿಂದ ಪಾಟೀಲ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ ಬೂದಿಹಾಳ,ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ ಕಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ಕೋಶಾಧ್ಯಕ್ಷ ಸಂತೋಷ ದೇಶನೂರ,ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ ಮೋಹಿತೆ, ನಿಂಗಪ್ಪ ಚೌಡನ್ನವರ, ಸುಭಾಷ ತುರಮರಿ,ಮನೋಜ ಪಾಟೀಲ, ಶ್ರೀಕರ ಕುಲಕರ್ಣಿ, ಸಂತೋಷ ಹಡಪದ, ವಿಶಾಲ ಬೋಗುರ, ಸಿದ್ದು ಬೋಳಣ್ಣವರ, ಬಸವರಾಜ ದೊಡಮನಿ,ಬಸವರಾಜ ನೇಸರಗಿ, ಮಂಜುನಾಥ ಅಷ್ಟಗಿ ಇತರರಿದ್ದರು.

