ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟವು ರಾಜ್ಯಪಾಲರಿಗೆ ಅಧಿಕೃತವಾಗಿ ಶಿಫಾರಸು ಮಾಡಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈ ಹಿಂದೆ ಹೊರಡಿಸಿದ್ದ ಅಮಾನತು ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದ ಬೆನ್ನಲ್ಲೇ, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಈ ವಾರದ ರಾಜ್ಯಪಾಲರ ಅಮಾನತು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠವು, ಶಿವಶಂಕರಪ್ಪ ಸಾಹುಕಾರ್ ಅವರ ಅಮಾನತು ಪ್ರಕ್ರಿಯೆಯಲ್ಲಿ ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆದೇಶಿಸಿತ್ತು.
ಕೆಪಿಎಸ್ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟವು ಈ ಹಿಂದೆ ಯಾವುದೇ ಸಲಹೆ ಅಥವಾ ಶಿಫಾರಸು ನೀಡಿರಲಿಲ್ಲ. ಸಾಂವಿಧಾನಿಕ ನಿಯಮಗಳ ಪ್ರಕಾರ ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನು ಆಧರಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಆದರೆ ಈ ಪ್ರಕ್ರಿಯೆಯನ್ನು ಉಲ್ಲಂಘಿಸಿ ಆದೇಶ ಹೊರಡಿಸಲಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತ್ತು.
ಜುಲೈ 10ರಂದು ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶವನ್ನು ರದ್ದುಗೊಳಿಸಿದ್ದ ಹೈಕೋರ್ಟ್ 7 ದಿನಗಳ ಒಳಗೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಮರುನೇಮಕ ಮಾಡಲು ಆದೇಶಿಸಿತ್ತು.




