ನವದೆಹಲಿ: ಕಳೆದ ಮೂರು ದಿನಗಳಿಂದಲೂ ಮೌನವಾಗಿದ್ದ ಡಿಕೆ ಶಿವಕುಮಾರ್ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಹೈಕಮಾಂಡ್ ನಾಯಕರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ನಾಳೆ ಸಂಜೆ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಎಲ್ಲ ಶಾಸಕರಿಗೂ ಬೆಂಗಳೂರಿನಲ್ಲೇ ಇರಲು ಸೂಚನೆ ನೀಡಲಾಗಿದೆ. ಹೈಕಮಾಂಡ್ ನಾಯಕರ ಸೂಚನೆಯ ಮೇರೆಗೆ ಈ ಸಭೆಯ ಸಮಯವನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಮೊದಲಿಗೆ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಳ್ಳಬೇಕು, ನಂತರವಷ್ಟೇ ಉಳಿದ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಪ್ರಮಾಣ ವಚನ ಸ್ವೀಕಾರದ ದಿನಾಂಕ ಅಥವಾ ಸಚಿವ ಸಂಪುಟ ರಚನೆಯ ಕುರಿತು ಪ್ರಸ್ತುತ ಯಾವುದೇ ಮಾಹಿತಿಯನ್ನು ಅವರು ಬಹಿರಂಗಪಡಿಸಿಲ್ಲ. ಎಲ್ಲವನ್ನೂ ಹಂತ ಹಂತವಾಗಿ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಇಂದು ಡಿಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಖರ್ಗೆಯವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು.



