ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿ ಸರ್ಕಾರಿ ಜಮೀನಿನಲ್ಲಿ ಫಲವೃಕ್ಷೋದ್ಯಾನ ಅಭಿವೃದ್ಧಿಪಡಿಸಿ, ಅದನ್ನು ವಾರ್ಷಿಕ ಆಧಾರದ ಮೇಲೆ ಪಾರದರ್ಶಕ ಹರಾಜು ಮೂಲಕ ಅದೇ ಗ್ರಾಮದ ಯುವಕರಿಗೆ ಗುತ್ತಿಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಕುರಿತು ಇಲಾಖೆಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಪ್ರತಿ ಗ್ರಾಮದಲ್ಲೂ ಫಲವೃಕ್ಷೋದ್ಯಾನ ನಿರ್ಮಿಸಿದರೆ ಹಸಿರು ಹೊದಿಕೆ ಹೆಚ್ಚುವುದರ ಜೊತೆಗೆ ನಿರುದ್ಯೋಗಿ ಮತ್ತು ಭೂರಹಿತ ಯುವಕರಿಗೆ ಉದ್ಯೋಗ ಸಿಗಲಿದೆ. ಇದರಿಂದ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆಗೆ ಹೆಚ್ಚುವರಿ ಆದಾಯವೂ ಬರಲಿದೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ಇಲಾಖೆಗೆ ಸೇರಿದ ಸರ್ಕಾರಿ ಜಮೀನಿನಲ್ಲಿ ಮಾವು, ಸಪೋಟ, ಬೆಟ್ಟನೆಲ್ಲಿಕಾಯಿ, ತೆಂಗು, ಹೈಬ್ರೀಡ್ ನೇರಳೆ, ಹುಣಸೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯುವಂತೆ ಸಲಹೆ ನೀಡಿದ್ದಾರೆ.
ಇದರಿಂದ ಸರ್ಕಾರಿ ಜಮೀನುಗಳ ಒತ್ತುವರಿ ತಡೆಯಲು ಸಾಧ್ಯವಾಗುತ್ತದೆ. ಅಗತ್ಯ ಬಂದರೆ ಈ ಮರಗಳನ್ನು ತೆರವುಗೊಳಿಸಿ ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಭೂಮಿಯನ್ನು ಬಳಸಬಹುದಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದರ ಜೊತೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಮತ್ತು ಸಂಪರ್ಕ ರಸ್ತೆಗಳ ಎರಡೂ ಬದಿಯಲ್ಲಿ ಮಾವು, ಹುಣಸೆ ಸೇರಿದಂತೆ ಫಲ ನೀಡುವ ಮರಗಳನ್ನು ನೆಡುವಂತೆ ಸೂಚಿಸಿದ್ದಾರೆ.
ಈ ಮರಗಳ ಫಲವನ್ನು ವಾರ್ಷಿಕ ಹರಾಜು ಮೂಲಕ ಸ್ಥಳೀಯರಿಗೆ ಗುತ್ತಿಗೆ ನೀಡಿದರೆ ಪಂಚಾಯಿತಿಗಳಿಗೆ ಆದಾಯ ಹೆಚ್ಚುವುದರ ಜೊತೆಗೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೂ ನೆರವಾಗಲಿದೆ. ಸ್ಥಳೀಯರಿಗೆ ಹೆಚ್ಚುವರಿ ಆದಾಯವೂ ಸಿಗಲಿದೆ ಎಂದು ತಿಳಿಸಿದ್ದಾರೆ.
ಈ ಯೋಜನೆಯನ್ನು ಜಾರಿಗೆ ತರಲು ಕಂದಾಯ ಇಲಾಖೆ, ಅರಣ್ಯ ಇಲಾಖೆ ಹಾಗೂ ವಿಬಿಜಿ ರಾಮ್ಜಿ ಸಹಯೋಗದಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.




