ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿರುವ ಕರ್ನಾಟಕ ಬಂದ್ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.
ಬಂದ್ನಿಂದ ಸಾರ್ವಜನಿಕರಿಗೆ ತೊಂದರೆಯೇ ಹೆಚ್ಚು. ಹೀಗಾಗಿ ಈಗಿನ ಪರಿಸ್ಥಿತಿಯಲ್ಲಿ ಬಂದ್ ನಡೆಸುವುದು ಬೇಡ., ಅದರ ಬದಲು ವಿಭಿನ್ನ ರೀತಿಯಲ್ಲಿ ಹೋರಾಟ ಮಾಡೋಣ ಎಂದು ವಾಟಾಳ್ ನಾಗರಾಜ್ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಜಲಾಶಯಗಳಲ್ಲಿ ನೀರಿಲ್ಲದ ಸಮಯದಲ್ಲಿ ತಮಿಳುನಾಡಿಗೆನೀರು ಹರಿಸುವಂತೆ ಬಂದ ಆದೇಶವನ್ನು ಖಂಡಿಸಿ ಆ.13 ರಂದು ಬಂದ್ ಕರೆ ನೀಡಿದ್ದೆವು. ಆದರೆ ಮುಖ್ಯಮಂತ್ರಿಗಳು ಹಾಗೂ ಸಚಿವರು ಈ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಸಿಎಂ ಒತ್ತಡದ ಆರೋಪ ತಳ್ಳಿಹಾಕಿದ ಅವರು, ಸರ್ಕಾರ ಅಥವಾ ಮುಖ್ಯಮಂತ್ರಿಗಳ ಕಡೆಯಿಂದ ಯಾವುದೇ ಒತ್ತಡ ಬಂದಿಲ್ಲ. ನಾವು ಯಾರ ಮನೆಗೂ ಫಂಡ್ ಕೇಳಲು ಹೋಗುವುದಿಲ್ಲ, ನಮಗೆ ಯಾರ ಭಯವೂ ಇಲ್ಲ. ಮಳೆಯಾಗುತ್ತಿರುವ ಪರಿಸ್ಥಿತಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಬಂದ್ ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಪ್ರವೀಣ್ ಶೆಟ್ಟಿ ತಿಳಿಸಿದರು.

