ಬೆಂಗಳೂರು: ಅಂಗನವಾಡಿ ಕೇಂದ್ರಗಳ ಮೂಲಕ ಮಹಿಳೆಯರು ಮತ್ತು ಮಕ್ಕಳಿಗೆ ಪೂರಕ ಪೌಷ್ಟಿಕಾಂಶವನ್ನು ಪೂರೈಸಲು ಕೇಂದ್ರೀಕೃತ ವ್ಯವಸ್ಥೆಯನ್ನು ಪರಿಚಯಿಸಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಪ್ರಸ್ತುತ, ಮಹಿಳಾ ಪೂರಕ ಪೌಷ್ಟಿಕಾಂಶ ಉತ್ಪಾದನೆ ಮತ್ತು ತರಬೇತಿ ಕೇಂದ್ರಗಳು ಅಂಗನವಾಡಿ ಕೇಂದ್ರಗಳಿಗೆ ಪೂರಕ ಪೌಷ್ಟಿಕಾಂಶವನ್ನು ಪೂರೈಸುತ್ತಿದ್ದು, ಯಾವುದೇ ಅಕ್ರಮಗಳನ್ನು ತಡೆಗಟ್ಟಲು ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಹೇಳಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯಾದ್ಯಂತ ಅಂಗನವಾಡಿಗಳಿಗೆ ಪೂರಕ ಪೌಷ್ಟಿಕಾಂಶ ಪೂರೈಸಲು ಕೇಂದ್ರೀಕೃತ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರವೊಂದಕ್ಕೆ ತಾನು ಅನಿರೀಕ್ಷಿತ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ನೋಡಿ ಆಘಾತಕ್ಕೊಳಗಾಗಿದ್ದೇನೆ ಮತ್ತು ನಿರ್ದಿಷ್ಟ ಕೇಂದ್ರವನ್ನು ತಕ್ಷಣವೇ ಮುಚ್ಚುವಂತೆ ನಾನು ನಿರ್ದೇಶಿಸಿದ್ದಾಗಿ ತಿಳಿಸಿದರು.
ತಾನು ಭೇಟಿ ನೀಡಿದ ಕೇಂದ್ರವು ಕೊಳೆತ ಮೊಟ್ಟೆಗಳನ್ನು ಪೂರೈಸುತ್ತಿದೆ ಎಂದು ಅವರು ಸದನಕ್ಕೆ ತಿಳಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ನಾನು ಎಲ್ಲಾ ಕೇಂದ್ರಗಳಿಂದ ಪೂರಕ ಪೌಷ್ಟಿಕಾಂಶದ ಪೂರೈಕೆಯ ಬಗ್ಗೆ ಸಂಪೂರ್ಣ ವರದಿಯನ್ನು ಕೇಳಿದ್ದೇನೆ” ಎಂದು ತಿಳಿಸಿದರು.
ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ನಾರಾಯಣಸ್ವಾಮಿ, ಕಳಪೆ ಗುಣಮಟ್ಟದ ಆಹಾರ ಪೂರೈಕೆಯಲ್ಲಿ ಇಲಾಖೆ ಅಧಿಕಾರಿಗಳ ಕೈವಾಡವಿದೆ ಎಂದು ಆರೋಪಿಸಿದರು. ಸಾಕ್ಷ್ಯಾಧಾರಗಳಿದ್ದರೆ ಒದಗಿಸುವಂತೆ ಎಂಎಲ್ಸಿಗೆ ಮನವಿ ಮಾಡಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.