ಬೆಳಗಾವಿ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ.
ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, “ವಿಶ್ವದ ಮೊದಲ ಸಂಸತ್ತು” ಎಂಬ ಖ್ಯಾತಿಯ, “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರ ಅನಾವರಣವು ಸೋಮವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಯಾಗಿರುವರು.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಹಾಗೂ ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರು ಉಪಸ್ಥಿತರಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಇದು ಕೇವಲ ಒಂದು ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮವಲ್ಲ, ಬದಲಾಗಿ ನಮ್ಮ ಪ್ರಜಾಪ್ರಭುತ್ವದ ಮೂಲ ಆಶಯಗಳು, ಸಮಾನತೆ, ಮಾನವೀಯ ಸಂದೇಶಗಳನ್ನು ಜಗತ್ತಿಗೆ ಮತ್ತೊಮ್ಮೆ ಪರಿಚಯಿಸುವ ಹಾಗೂ ಮಹಾತ್ಮಾ ಗಾಂಧೀಜಿಯವರು ಅಧಿವೇಶನದಲ್ಲಿ ಪಾಲ್ಗೊಂಡ ಶತಮಾನೋತ್ಸವದ, ಸ್ಮರಣಾರ್ಥವಾಗಿ ನಡೆಯುವ ಒಂದು ಮಹತ್ವದ ಐತಿಹಾಸಿಕ ಕ್ಷಣವಾಗಿದೆ.